ಕಾನೂನು ಪ್ರಕ್ರಿಯೆ ಪಾಲಿಸದೆ ಬೀದಿ ವ್ಯಾಪಾರಿಗಳ ತೆರವು ಬೇಡ ಎಂದ ಹೈಕೋರ್ಟ್
ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಬೀದಿ ವ್ಯಾಪಾರಿಗಳ ಜೀವನೋಪಾಯ ಮತ್ತು ಹಿತರಕ್ಷಣೆಗೆ ಸಂಬಂಧಿಸಿದ Street Vendors (Protection of Livelihood and Regulation of Street Vending) Act, 2014 ಅಡಿಯಲ್ಲಿ ನಿಗದಿಪಡಿಸಿರುವ ಕಾನೂನು ಪ್ರಕ್ರಿಯೆಯನ್ನು ಪಾಲಿಸಿಯೇ ತೆರವು ಅಥವಾ ಸ್ಥಳಾಂತರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮಂಗಳೂರಿನ ಟೌನ್ಹಾಲ್ ಸಮೀಪದ ಸಂಡೇ ಬಜಾರ್ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಹಾಗೂ ಇತರರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಸಂಘದ ಪರ ಹಿರಿಯ ವಕೀಲ ಎಸ್. ಬಾಲನ್ ವಾದ ಮಂಡಿಸಿದ್ದರು.
ಅರ್ಜಿದಾರರ ಪರ ವಾದದಲ್ಲಿ, ಸಂಡೇ ಬಜಾರ್ನ ವ್ಯಾಪಾರಿಗಳಿಗೆ ಯಾವುದೇ ನೋಟಿಸ್ ನೀಡದೆ ತೆರವು ಮತ್ತು ಧ್ವಂಸ ಕಾರ್ಯಾಚರಣೆ ನಡೆಸಲಾಗಿದೆ. ಇದು ನೈಸರ್ಗಿಕ ನ್ಯಾಯದ ತತ್ವಗಳು ಹಾಗೂ Street Vendors Act, 2014ರಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಗೆ ವಿರುದ್ಧವಾಗಿದೆ ಎಂದು ತಿಳಿಸಲಾಯಿತು.
ಅಧಿಕಾರಿಗಳು ಸುಪ್ರೀಂ ಕೋರ್ಟ್ನ Maniyar Iliyaz v. P. Ayyappan & Others ಪ್ರಕರಣದ ತೀರ್ಪನ್ನು ಆಧರಿಸಿ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಆ ತೀರ್ಪು ಪಾದಚಾರಿಗಳಿಗೆ ಸೂಕ್ತ ಮೂಲಸೌಕರ್ಯ ಮತ್ತು ಪಾದಚಾರಿ ಮಾರ್ಗ ಕಲ್ಪಿಸುವುದಕ್ಕೆ ಸಂಬಂಧಿಸಿದೆ. ಬೀದಿ ವ್ಯಾಪಾರಿಗಳು ಅಥವಾ ವಾರದ ಮಾರುಕಟ್ಟೆಗಳನ್ನು ಏಕಾಏಕಿ ತೆರವುಗೊಳಿಸುವಂತೆ ಆ ತೀರ್ಪಿನಲ್ಲಿ ನಿರ್ದೇಶನ ನೀಡಿಲ್ಲ ಎಂದು ಅರ್ಜಿದಾರರ ಪರ ವಾದಿಸಲಾಯಿತು.
ವಾದ ಆಲಿಸಿದ ಹೈಕೋರ್ಟ್, ಸುಪ್ರೀಂ ಕೋರ್ಟ್ ನಿರ್ದೇಶನವು ರಸ್ತೆಗಳಿಗೆ ಸೂಕ್ತ ಪಾದಚಾರಿ ಮಾರ್ಗ ಇರುವುದಕ್ಕೆ ಸಂಬಂಧಿಸಿದೆ. Street Vendors Act, 2014 ರದ್ದಾಗಿಲ್ಲ ಮತ್ತು ಬೀದಿ ವ್ಯಾಪಾರಿಗಳಿಗೆ ಕಾನೂನಿನಡಿ ರಕ್ಷಣೆ ಇದೆ. ಆದ್ದರಿಂದ ಪುನರ್ವಸತಿ ಸೇರಿದಂತೆ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸದೆ ಅವರನ್ನು ತೆರವುಗೊಳಿಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.



Post Comment